Sunday, April 28, 2024

ಅವಳಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ನಮೋ ಮೆರುಗು : ಏ.29 ರಂದು ಬಾಗಲಕೋಟೆಗೆ ಪ್ರಧಾನಿ ಮೋದಿ ಆಗಮನ


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಲೋಕಸಭಾ ಚುನಾವಣೆ ಪ್ರಯುಕ್ತ ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಾರ್ಥ ವಿಶ್ವನಾಯಕ, ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಏ. 29 ರಂದು ಬಾಗಲಕೋಟೆಗೆ ಆಗಮಿಸಲಿದ್ದು, ಬೃಹತ್ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಬಿಜೆಪಿ ಪ್ರಚಾರಕ್ಕೆ ಮೆರುಗು ನೀಡಲಿದ್ದಾರೆಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕುಚಬಾಳ ಮಾಹಿತಿ ನೀಡಿದರು.

ಏ.29 ರಂದು ಬೆಳಿಗ್ಗೆ 11 ಗಂಟೆಗೆ ಬಾಗಲಕೋಟೆ ನವನಗರದ ತೋಟಗಾರಿಕಾ ವಿವಿ ಆವರಣದಲ್ಲಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ‌ ಮೋದಿಯವರು ಅವಳಿ ಜಿಲ್ಲೆಯ ಜನತೆಯನ್ನುದ್ದೇಶಿಸಿ ಮಾತನಾಡಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿ ಬಲ ತುಂಬಲಿದ್ದಾರೆ. ಅವಳಿ ಜಿಲ್ಲೆಯ ಬಿಜೆಪಿ‌ ಅಭ್ಯರ್ಥಿಗಳಾದ ರಮೇಶ ಜಿಗಜಿಣಗಿ ಹಾಗೂ ಪಿ.ಸಿ.ಗದ್ದಿಗೌಡರ ಸೇರಿದಂತೆ ಅನೇಕ ಭಾಜಪ ಹಾಗೂ ಜೆಡಿಎಸ್ ಪ್ರಮುಖರು, ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. 

ಇನ್ನೂ ಎಲ್ಲೆಡೆ ಚುನಾವಣಾ ಕಾವು ಜೋರಾಗಿದ್ದು, ಪ್ರಚಾರಕ್ಕೆ ಹೋದ ಕಡೆಗಳಲ್ಲಿ ಜನರಿಂದ ಬಿಜೆಪಿ ಪರ ಅತ್ಯುತ್ತಮ ಸ್ಪಂದನೆ ದೊರೆಯುತ್ತಿದೆ. ವಿಕಸಿತ ಭಾರತ ಸಂಕಲ್ಪ ಸಾಕಾರಗೊಳಿಸಲು ಮೋದಿಯವರು ಮತ್ತೊಮ್ಮೆ ಪ್ರಧಾನಿಯಗಬೇಕು ಎಂಬುದು ಎಲ್ಲರ ಒತ್ತಾಯವಾಗಿದೆ. ಈ ಸಭೆಗೆ ವಿಜಯಪುರ ಜಿಲ್ಲೆಯಿಂದ ಸುಮಾರು 25-30 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ. ಜಿಲ್ಲೆ ಎಲ್ಲಾ ಕಾರ್ಯಕರ್ತರು, ಬಿಜೆಪಿ ಬೆಂಬಲಿಗರು, ಮೋದಿಯವರ ಹಿತೈಸಿಗಳು ಅಭಿಮಾನಿಗಳು ಅತಿ‌ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆರ್.ಎಸ್.ಪಾಟೀಲ್ ಕುಚಬಾಳ ಮನವಿ ಮಾಡಿಕೊಂಡರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಸಂಜಯ ಪಾಟೀಲ ಕನಮಡಿ, ಜಿಲ್ಲಾ ಕೋಶಾಧ್ಯಕ್ಷ ಭೀಮಾಶಂಕರ ಹದನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಈರಣ್ಣ ರಾವೂರ, ಸಾಬೂ ಮಾಶ್ಯಾಳ, ಮಹಿಳಾ ಮುಖಂಡರಾದ ಮಲ್ಲಮ್ಮ ಜೋಗೂರ, ಮಾಧ್ಯಮ ಪ್ರಮುಖ ವಿಜಯ್ ಜೋಶಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಲೋಕಸಭಾ ಚುನಾವಣೆ - 2024 : ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮಕ್ಕೆ ಚಾಲನೆ


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಸುಭದ್ರ ರಾಷ್ಟ್ರ ನಿರ್ಮಾಣ ಹಾಗೂ ಪ್ರಜಾಪ್ರಭುತ್ವದ ಭದ್ರ ಬುನಾದಿಗಾಗಿ ಭವಿಷ್ಯದ ಆಲೋಚನೆಯೊಂದಿಗೆ  ಪ್ರತಿಯೊಬ್ಬರು ಮೇ.7 ರಂದು ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು. 

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮಹಾನಗರ ಪಾಲಿಕೆ, ಸಂಯುಕ್ತಾಶ್ರಯದಲ್ಲಿ  ಭಾನುವಾರ ನಗರದ ದರಬಾರ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ “ನಮ್ಮ ನಡೆ ಮತಗಟ್ಟೆ ಕಡೆ” ಕಾರ್ಯಕ್ರಮದಲ್ಲಿ ಚುನಾವಣಾ ಧ್ವಜಾರೋಹಣ ನೆರವೇರಿಸಿ, ಮತದಾನದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು ಹಾಗೂ ಜವಾಬ್ದಾರಿ. ಪ್ರಜಾಪ್ರಭುತ್ವದಲ್ಲಿ ಇಂತಹ ಅವಕಾಶ ಸಂವಿಧಾನ ಕಲ್ಪಿಸಿದೆ. ಸಂವಿಧಾನ ನೀಡಿದ ಅಧಿಕಾರವನ್ನು ಕಳೆದುಕೊಳ್ಳಬಾರದು. ಮತದಾನ ಮಾಡುವ ಮುಲಕ ಪ್ರಜಾಪ್ರಭುತ್ವ ಹಬ್ಬ ಆಚರಿಸಬೇಕು. 18 ವರ್ಷ ತುಂಬಿದ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಹೇಳಿದರು.

ನಮ್ಮ ದೇಶವನ್ನು 5 ವರ್ಷಗಳ ಕಾಲ ಆಡಳಿತ ನಡೆಸುವ ಸರ್ಕಾರದ ಆಯ್ಕೆ ನಮ್ಮ ಕೈಯಲ್ಲಿದೆ. ಸಂವಿಧಾನ ನೀಡಿದ ಮತದಾನದ ಹಕ್ಕಿನಿಂದ ಯಾರೂ ಕೂಡ ವಂಚಿತರಾಗದೇ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ದಿನ ಮತಗಟ್ಟೆಗಳಿಗೆ ತೆರಳಿ ಮುಂದಿನ ಭವಿಷ್ಯದ ಆಲೋಚನೆಯೊಂದಿಗೆ ಯೋಗ್ಯ ಅಭ್ಯರ್ಥಿಗಳ ಆಯ್ಕೆಗಾಗಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಅವರು ಹೇಳಿದರು.



ಜಿಲ್ಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಗಳಲ್ಲಿ ಮತದಾರರ ಅನುಕೂಲಕ್ಕಾಗಿ  ಎಲ್ಲ ಮತಗಟ್ಟೆಗಳಲ್ಲಿ ಬಿಸಿಲಿನ ರಕ್ಷಣೆಗಾಗಿ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಿಕಲಚೇತನರಿಗಾಗಿ ರ್ಯಾಂಪ್, ಅಶಕ್ತರಿಗೆ ವ್ಹೀಲ್ ಚೇರ್ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಶೇಕಡಾ ನೂರರಷ್ಟು ಮತದಾನ ಪ್ರಮಾಣ ಹೆಚ್ಚಿಸುವ ಗುರಿ ಹೊಂದಲಾಗಿದೆ. ಗ್ರಾಮಿಣ ಹಾಗೂ ನಗರ ಪ್ರದೇಶದಲ್ಲಿ ಕಳೆದ ಚುನಾವಣೆಳಲ್ಲಿ ಅತಿ  ಕಡಿಮೆ ಮತದಾನವಾದ  ಪ್ರದೇಶಗಳನ್ನು ಗುರುತಿಸಿ, ಈ ಸ್ಥಳಗಳಲ್ಲಿ ಸ್ವೀಪ್ ಕಾರ್ಯಚಟುವಟಿಕೆಗಳನ್ನು  ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಮತದಾರರನ್ನು ಮತಗಟ್ಟೆಯತ್ತ ಆಕರ್ಷಿಸಿ ಹೆಚ್ಚಿನ ಮತದಾನಕ್ಕೆ ಕ್ರಮ ವಹಿಸಲಾಗುತ್ತಿದೆ. ನೋಟಾ ಮತಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಮೇ 07ರಂದು ಮತದಾನ  ನಡೆಯಲಿದೆ. ಎಲ್ಲ ಕುಟುಂಬದವರು ಅರ್ಹ ಮತದಾರರೊಂದಿಗೆ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವಂತೆ ಮನವಿ ಮಾಡಿಕೊಂಡ ಅವರು, ಮತದಾನದ ಹಕ್ಕು ಅತ್ಯಂತ ಪವಿತ್ರ ಹಾಗೂ ಅಮೂಲ್ಯವಾದದ್ದು ಹಾಗೂ ಪವಿತ್ರವಾದದ್ದು, ಉತ್ತಮ ಸಮಾಜ, ಸುಭದ್ರ ದೇಶ ನಿರ್ಮಾಣದಲ್ಲಿ ಪ್ರತಿಯೊಬ್ಬರ ಮತ ಅತ್ಯಅಮೂಲ್ಯ ಹಾಗಾಗಿ ಯಾರೂ ಕೂಡ ನಿರ್ಲಕ್ಷ್ಯ ಭಾವನೆ ತೋರದೆ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಮತದಾನದ ಮೌಲ್ಯವನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದರು. 

ಚುನಾವಣಾ ಆಯೊಗದ ನಿರ್ದೇಶನದಂತೆ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗ್ರಾಮ ಪಂಚಾಯತ್ ಸೇರಿದಂತೆ ನಗರ ಮಟ್ಟದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್ ಸಮಿತಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಮಾತನಾಡಿ, ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನ ಹೊಂದಿದ ದೇಶ ನಮ್ಮದು. ಇಂತಹ ದೇಶದದಲ್ಲಿ ಜನಿಸಿದ ಪ್ರತಿಯೊಬ್ಬ ನಾಗರಿಕನೂ ಪುಣ್ಯವಂತ. ಉತ್ತಮ ಪ್ರಜಾಪ್ರಭುತ್ವ ಹೊಂದಿರುವ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆನ್ನು ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಕರ್ತವ್ಯವನ್ನು ನಿಭಾಯಿಸಲು  ಮತದಾನ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬರು ಮತದಾನ ಹಬ್ಬದಲ್ಲಿ ಸಕ್ರೀಯವಾಗಿ ಭಾಗವಹಿಸಿ, ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದ ಅವರು, ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ  ಯೋಗ್ಯ ಅಭ್ಯರ್ಥಿಗಳ ಆಯ್ಕೆಗಾಗಿ ಕಡ್ಡಾಯವಾಗಿ ಮತ ಚಲಾಯಿಸುವಂತೆ  ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ ರಚಿಸಿದ ಮತದಾರರ ಜಾಗೃತಿ ಗೀತೆಯನ್ನು ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ಸಾಕ್ಷಿ ಹಿರೇಮಠ ಹಾಡಿದರು. ಎಲ್ಲರೂ ಮತದಾನ ಜಾಗೃತಿ ಕುರಿತು ಘೋಷಣೆಗಳನ್ನು ಕೂಗಿದರು. ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಮತದಾನ ಜಾಗೃತಿ ಅಭಿಯಾನ ಅಂಗವಾಗಿ ಹಮ್ಮಿಕೊಂಡ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಇದಕ್ಕೂ ಮೊದಲು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಿಂದ ಆರಂಭಗೊಂಡ ಮತದಾನ ಜಾಗೃತಿ ಜಾಥಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಮಹಾನಗರ ಪಾಲಿಕೆ ಆಯುಕ್ತ ಆಶಾದ ಉರ್ ರೆಹಮಾನ ಶರೀಫ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.  

ಜಾಗೃತಿ ಜಾಥಾ ಅಭಿಯಾನವು ದರಬಾರ ಶಿಕ್ಷಣ ಸಂಸ್ಥೆ ಆವರಣದರೆಗೆ ಸಾಗಿತು.

ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾದ ಡಾ. ರತನ್ ಕನ್ವರ್ ಹೆಚ್. ಗಧವಿಚರಣ, ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ ಆರ್ ಮುಂಡರಗಿ, ಉಪಕಾರ್ಯದರ್ಶಿ ಬಿ ಎಸ್ ಮೂಗನೂರಮಠ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಪ್ರೀತಮ್ ನಸಲಾಪುರ, ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿಗಳಾದ ರಾಜೇಶ್ ಪವಾರ, ಸಹನಾ ಕುಡಿಗನೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕಾಲೇಜ್ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಇತರರು. ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.