ಹಿಂದೂ ಪಂಚಾಂಗದ ಪ್ರಕಾರ ಎಲ್ಲಾ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ಹಬ್ಬ ಎಂದರೆ ಅದು ನಾಗರ ಪಂಚಮಿ. ಶ್ರಾವಣ ಶುದ್ಧ ಪಂಚಮಿಯಿಂದ ಆಚರಿಸಲ್ಪುಡುವ ಈ ಹಬ್ಬ ಮುಂದೆ ಬರಲಿರುವ ಗಣೇಶ ಚತುರ್ಥಿ, ಕೃಷ್ಣಾಷ್ಟಮಿ, ನವರಾತ್ರಿ, ಊರಿನ ಜಾತ್ರೆಗೆ, ಎಲ್ಲಾ ಶುಭ ಆಚರಣೆಗಳಿಗೆ ಮೊದಲ ಮೆಟ್ಟಿಲು.
ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. ನಾಗಪ್ಪನಿಗೆ ಹಲವು ವಿಧದ ಉಂಡೆಗಳು, ಕರಿ ಎಳ್ಳಿನಿಂದ ಮಾಡಿದ ಉಂಡೆ, ಚಿಗಳಿ ತಂಬಿಟ್ಟು, ಕರದಂಟು, ನಾನಾತರದ ಕಡಬುಗಳು, ಚುರುಮುರಿ ಚುಡಾ, ಮತ್ತು ಬೆಲ್ಲ ಬೆರೆಸಿ ಮಾಡಿದ ತಂಬಿಟ್ಟಿನ ನೈವೇದ್ಯವನ್ನು ಮಾಡಲಾಗುತ್ತದೆ.
ಅಣ್ಣ ತಂಗಿಯ ಪ್ರೀತಿ ಸಾರುವಂತಹ ಈ ಹಬ್ಬದಲ್ಲಿ ಅಕ್ಕ ತಂಗಿಯರು ಅಣ್ಣ ತಮ್ಮಂದಿರ ಆಯಸ್ಸು, ಆರೋಗ್ಯ ಮತ್ತು ಸಕಲ ಸುಖಗಳನ್ನು ನೀಡುವಂತೆ ದೇವರಲ್ಲಿ ಪ್ರಾರ್ಥಿಸಿಕೊಳ್ಳವ ದಿನವಾಗಿದೆ. ಹುತ್ತಕ್ಕೆ ಹಾಲು ಎರೆದು, ಹುತ್ತದ ಮಣ್ಣನ್ನು ಹೊಕ್ಕಳು ಅಥವಾ ಬೆನ್ನಿಗೆ ಹಚ್ಚಿ ಒಳ್ಳೆದಾಗಲಿ ಎಂದು ಹಾರೈಸುತ್ತಾರೆ. ನಾಗದೇವತೆಗಳಿಗೆ ಅನುಗ್ರಹ ಮತ್ತು ನಿಗ್ರಹ ಮಾಡುವಂತಹ ಸಾಮರ್ಥ್ಯ ಇರುವುದರಿಂದ ಸರ್ಪು ಪೂಜೆಗೆ ವಿಶೇಷವಾದ ಮಾನ್ಯತೆ ನೀಡಲಾಗಿದೆ.
ಇನ್ನು ಉತ್ತರ ಕರ್ನಾಟಕದಲ್ಲಿ ಈ ಹಬ್ಬ ಮತ್ತಷ್ಟು ವಿಶಿಷ್ಟವಾಗಿರುತ್ತದೆ. ಈ ಹಬ್ಬದಲ್ಲಿ ಮನೆಗಳಲ್ಲಿ ಮತ್ತು ಊರಿನಲ್ಲಿ ಜೋಕಾಲಿ ಕಟ್ಟಿ ಹಾಡುವಂತಹ ವಿಶಿಷ್ಟ ಪದ್ಧತಿ ಇದೆ. ಹಿರಿಯರು ಕಿರಿಯರು ಭೇದವಿಲ್ಲದೇ ಜೋಕಾಲಿ ಆಡುತ್ತಾರೆ. ನಾಗರಪಂಚಮಿ ಹಬ್ಬ ಉತ್ತರ ಕರ್ನಾಟಕ ಭಾಗದಲ್ಲಿ ಜೋಕಾಲಿ ಹಬ್ಬವೆಂದು ಪ್ರಸಿದ್ಧಿ ಪಡೆದಿದೆ. ನಾಗ ಪೂಜೆ ಮಾಡಿ ಸುಬ್ರಮಣ್ಯನನ್ನು ಆರಾಧನೆ ಮಾಡಿದರೆ ನಮ್ಮ ಇಡೀ ಕುಟುಂಬವನ್ನು ನಾಗಪ್ಪ ಕಾಯ್ತಾನೆ ಎಂಬ ನಂಬಿಕೆ ಇದೆ.
ನಾಗರ ಪಂಚಮಿ ಸಂಬಂಧಿಸಿದಂತೆ ಜನಪದ ಮತ್ತು ಪುರಾಣದಲ್ಲಿ ಹಲವು ಕಥೆಗಳಿವೆ. ಜನಪದ ಕಥೆಯ ಪ್ರಕಾರ ನಾಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮಧ್ಯೆ. ಈ ಕಾಲದ ಕೃಷಿ ಚಟುವಟಿಕೆಗಳು ಒಂದು ಹಂತ ತಲುಪಿರುತ್ತವೆ. ಈ ಕಾಲದಲ್ಲಿ ಕೀಟ, ಮಿಡತೆಗಳ ಹಾವಳಿ ಅಧಿಕ. ಅಷ್ಟೇ ಅಲ್ಲದೆ ಫಸಲು ತಿನ್ನಲು ಬರುವ ಇಲಿಗಳಿಗೂ ಕೊರತೆಯಿಲ್ಲ. ಇವೆಲ್ಲದರಿಂದ ರೈತನ ಫಸಲನ್ನು ಕಾಪಾಡುವುದು ಹಾವುಗಳು. ಇಲಿ, ಕಪ್ಪೆಗಳ ಅತಿಯಾದ ಹಾವಳಿಯನ್ನು ನಿಯಂತ್ರಿಸುವ ನಾಗರನಿಗೆ ಪುಟ್ಟದೊಂದು ಧನ್ಯವಾದ ಹೇಳಲು ನಡೆಸುವ ಪೂಜೆಯೇ ನಾಗರ ಪಂಚಮಿ.
ಸ್ಕಂದ ಪುರಾಣದಲ್ಲಿ ನಾಗರ ಪಂಚಮಿಯ ಬಗ್ಗೆ ಕೆಲ ಮಾಹಿತಿಗಳು ಸಿಗುತ್ತದೆ. ಶ್ರೀಕೃಷ್ಣನ ಮಗನಾದ ಸಾಂಬನು ಶಿವಸುತ ಸುಬ್ರಹ್ಮಣ್ಯನಲ್ಲಿ ನಾಗರ ಪಂಚಮಿಯನ್ನು ಯಾಕೆ ಆಚರಿಸಲಾಗುತ್ತದೆ ಎಂದು ಪ್ರಶ್ನೆ ಕೇಳಿದಾಗ ಆತನ ಒಂದು ಕಥೆಯನ್ನು ಹೇಳುತ್ತಾನೆ.
ಹಿಂದೆ ದೇವಶರ್ಮ ಎಂಬ ಬ್ರಾಹ್ಮಣನೊಬ್ಬನಿದ್ದನು. ಆತನಿಗೆ 8 ಗಂಡು ಮಕ್ಕಳು ಹಾಗೂ ಒಬ್ಬಾಕೆ ಹೆಣ್ಣು ಮಗಳಿದ್ದಳು. ಒಂದು ದಿನ ಗರುಡನಿಂದ ಹೆದರಿಸಲ್ಪಟ್ಟ ನಾಗರವೊಂದು ಈ ಕನ್ನಿಕೆಯ ಬಳಿ ಬಂದು ಆಶ್ರಯವನ್ನು ಕೇಳುತ್ತದೆ. ಭಕ್ತಿಯಿಂದ ಕನ್ನಿಕೆ ಆ ನಾಗನಿಗೆ ಹಾಲು, ಫಲಗಳನ್ನು ಇಟ್ಟು ಭಕ್ತಿಯಿಂದ ಸಾಕುತ್ತಾಳೆ. ಇದಕ್ಕೆ ಪ್ರತಿಯಾಗಿ ಆ ನಾಗವು ದಿನಂಪ್ರತಿ ಆಕೆಗೆ ಒಂದು ತೊಲೆ ಚಿನ್ನವನ್ನು ನೀಡುತ್ತಿರುತ್ತದೆ. ಹೀಗಿರಲು ಒಂದು ದಿನ ಎಂಟು ಗಂಡು ಮಕ್ಕಳಲ್ಲಿ ಒಬ್ಬನು ತುಂಬಾ ಬಂಗಾರ ಬೇಕೆಂದು ನಾಗನನ್ನು ಪೀಡಿಸಿ, ಕಾಲಿನಿಂದ ಒದೆಯುತ್ತಾನೆ. ಕೋಪಗೊಂಡ ನಾಗರ ಹಾವು ಅವನ್ನು ಸೇರಿದಂತೆ ಇತರ ಏಳು ಜನರನ್ನು ಕೊಂದು ಹೊರಟು ಹೋಗುತ್ತದೆ. ತನ್ನ ಅಣ್ಣಂದಿರ ಸಾವಿಗೆ ತಾನೇ ಕಾರಣನಾದೇ ಎಂದು ಆ ಕನ್ನಿಕೆ, ದೇವರ ಇದಿರಿನಲ್ಲಿ ಶಿರಚ್ಛೇದನಕ್ಕೆ ಮುಂದಾದಾಗ, ನಾರಾಯಣನು ವಾಸುಕಿಗೆ ಆ ಸತ್ತ ಹುಡುಗರನ್ನು ಬದುಕಿಸಲು ಹೇಳುತ್ತಾನೆ. ಈ ರೀತಿ ಪುನಃ ಅಣ್ಣಂದಿರ ಜೀವವನ್ನು ಮರಳಿ ಪಡೆದುಕೊಳ್ಳುವಲ್ಲಿ ಆ ಕನ್ನಿಕೆ ಯಶಸ್ವಿಯಾದ ದಿನವೇ ನಾಗರ ಪಂಚಮಿ ಹಬ್ಬ ನಮ್ಮ ಅಣ್ಣ ತಮ್ಮ ಹಾಗೂ ಕುಟುಂಬದವರಿಗೆ ನಾಗಪ್ಪನ ಆಶೀರ್ವಾದದಿಂದ ಒಳ್ಳೆದಾಗಲಿ ಎಂದು ಹೇಳುತ್ತಾ ಈ ಸಂಪ್ರಧಾಯನ್ನು ಹೀಗೆ ಮುನ್ನಡೆಸಿಕೊಂಡು ಹೋಗೋಣ ನಿಮಗೂ ಹಾಗೂ ನಿಮ್ಮ ಕುಟುಂಬದವರಿಗೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು.
ಶಿಲ್ಪಾ ಚವ್ಹಾಣ
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರ
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:
Post a Comment