Monday, July 10, 2023

ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಟಿ.ಭೂಬಾಲನ ಅಧಿಕಾರ ಸ್ವೀಕಾರ

 


 ಈ ದಿವಸ ವಾರ್ತೆ                              

ವಿಜಯಪುರ : ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ  2015ರ ಬ್ಯಾಚ್‍ನ  ಐಎಎಸ್ ಅಧಿಕಾರಿ ಟಿ.ಭೂಬಾಲನ್ ಅವರು ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಸೋಮವಾರ ಅಧಿಕಾರ ಸ್ವೀಕರಿಸಿದರು. ವಿಜಯಪುರ  ನಿರ್ಗಮಿತ ಜಿಲ್ಲಾಧಿಕಾರಿಗಳಾದ  ವಿಜಯಮಹಾಂತೇಶ ದಾನಮ್ಮನವರ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಬರಮಾಡಿಕೊಂಡು, ಹೂಗುಚ್ಛ ನೀಡಿ ಸ್ವಾಗತಿಸಿ, ಸೋಮವಾರ ಅಧಿಕಾರ ಹಸ್ತಾಂತರಿಸಿದರು.



 3 ವರ್ಷಗಳ ಕಾಲ ಬಾಗಲಕೋಟ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದ ಟಿ.ಭೂಬಾಲನ್ ಅವರು ವಿಜಯಪುರ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆಯಾಗಿದ್ದು, ಈ ಹಿಂದೆ ಬೀದರ ಮತ್ತು ದಾವಣಗೆರೆಯಲ್ಲಿ ಪ್ರೊಬೆಷನರಿಯಾಗಿ ಹಾಗೂ ಹರಪನಹಳ್ಳಿ  ಮತ್ತು ಉಡುಪಿಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ನಂತರ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ, ಸ್ಮಾರ್ಟ ಸಿಟಿ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಚುನಾವಣಾ ಸಂದರ್ಭದಲ್ಲಿ ಬೆಳಗಾವಿ ವಿಶೇಷ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.

Saturday, July 8, 2023

ಹಾಂಕಾಂಗ ಮೂಲದ ಕಂಪನಿಯಿಂದ ಸಿದ್ಧ ಉಡುಪು ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಉತ್ಸುಕತೆ 5 ರಿಂದ 6 ಸಾವಿರ ಉದ್ಯೋಗ ಸೃಷ್ಟಿಗೆ ಅವಕಾಶ : ಸಚಿವ ಶಿವಾನಂದ ಪಾಟೀಲ

  

ಈ ದಿವಸ ವಾರ್ತೆ

ವಿಜಯಪುರ: ಜಿಲ್ಲೆಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಹಾಂಕಾAಗ್ ಮೂಲದ ಟಾಲ್ ಅಪಾರೆಲ್ಸ್ ಜವಳಿ ಹಾಗೂ ಸಿದ್ಧ ಉಡುಪು ಉತ್ಪಾದನಾ ಕಂಪನಿಯು 700 ರಿಂದ 800 ಕೋಟಿ ರೂ ಹೂಡಿಕೆ ಮಾಡಲು ಉತ್ಸುಕತೆ ತೋರಿರುವ ಹಿನ್ನೆಲೆಯಲ್ಲಿ ಕಂಪನಿಯ ನಿರ್ದೇಶಕರಾದ ಇತಾನ್ ಯಾಂಗ್ ಅವರೊಂದಿಗೆ ಬೆಂಗಳೂರಿನಲ್ಲಿ ನಿನ್ನೆ ಸಭೆ ನಡೆಸಲಾಯಿತು ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ.

ಜವಳಿ ಖಾತೆ ಸಚಿವರೊಂದಿಗೆ ನಿನ್ನೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕಂಪನಿ ನಿರ್ದೇಶಕರಿಗೆ ಮಾಹಿತಿ ಒದಗಿಸಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಇರುವ ಪ್ರೋತ್ಸಾಹ ಹಾಗೂ ರಿಯಾಯಿತಿ ಕುರಿತು ವಿಸ್ತೃತವಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿಗಳಾದ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜವಳಿ ಇಲಾಖೆಯ ಆಯುಕ್ತರಾದ ಟಿ ಎಚ್ ಎಂ ಕುಮಾರ್ ಹಾಗೂ ಕೆ ಐಎಡಿಬಿ ಸಿಇಒ ಡಾ. ಮಹೇಶ್ ಇಲಾಖಾ ಅಧಿಕಾರಿಗಳು ಪಿಪಿಟಿ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿ ಮನವರಿಕೆ ಮಾಡಿದರು.

ಹಾಂಕಾಂಗ್ ಟಾಲ್ ಅಪಾರೆಲ್ಸ್ ಕಂಪನಿಯ ನಿರ್ದೇಶಕರಾದ ಇತಾನ್ ಯಾಂಗ್ ಅವರಿಗೆ ಬಂಡವಾಳ ಹೂಡಿಕೆಗೆ ಇರುವ ವಿಪುಲ ಅವಕಾಶಗಳು ಮನವರಿಕೆಯಾದ ಹಿನ್ನೆಲೆಯಲ್ಲಿ ಇಂದು (ಜು.8)ರಂದು ಅಭಿವೃದ್ಧಿಪಡಿಸಿದ ಮುಳವಾಡ ಕೈಗಾರಿಕಾ ಪ್ರದೇಶಕ್ಕೆ (ಕೆಐಎಡಿಬಿ) ತಂಡ ಭೇಟಿ ನೀಡಿ ಪರಿವೀಕ್ಷಣೆ ನಡೆಸಿತು. ಈ ಸಂದರ್ಭದಲ್ಲಿ  ಜವಳಿ ಇಲಾಖೆಯ ಆಯುಕ್ತರಾದ ಟಿ ಎಚ್ ಎಂ ಕುಮಾರ್, ಜಿಲ್ಲಾಧಿಕಾರಿಗಳಾದ ಡಾ.ವಿಜಯ ಮಹಾಂತೇಶ ದಾನಮ್ಮನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.   

ಜವಳಿ ಮತ್ತು ಸಿದ್ಧ ಉಡುಪು ಘಟಕ ಸ್ಥಾಪನೆಯಿಂದ ಐದರಿಂದ ಆರು ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಸಚಿವರು ತಿಳಿಸಿದ್ದಾರೆ.