Saturday, August 12, 2023

13-08-2023 EE DIVASA KANNADA DAILY NEWS PAPER

ಪರೀಕ್ಷೆ: ಡಿ.ಇಎಲ್‌ಇಡಿ ಕಾಲೇಜು ಶೇ.100ರಷ್ಟು ಫಲಿತಾಂಶ


ಈ ದಿವಸ ವಾರ್ತೆ

ಕೊಪ್ಪಳ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪಿಎಸ್.ಟಿ.ಇ ವಿಭಾಗ ಮುನಿರಾಬಾದ್, ಕೊಪ್ಪಳ ಇಲ್ಲಿನ 2022-23ನೇ ಸಾಲಿನ ಡಿ.ಇಎಲ್‌ಇಡಿ ಕಾಲೇಜಿನ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ.100ರಷ್ಟು ಫಲಿತಾಂಶ ಬಂದಿದೆ ಎಂದು ಟಿ.ಬಿ.ಪಿ ಮುನಿರಾಬಾದನ ಪ್ರಾಚಾರ್ಯರು ಹಾಗೂ ಪದ ನಿಮಿತ್ಯ ಉಪನಿರ್ದೇಶಕರು (ಅಭಿವೃದ್ಧಿ) ತಿಳಿಸಿದ್ದಾರೆ.

ಡಿ.ಇ.ಎಲ್.ಇ.ಡಿ ದ್ವಿತೀಯ ವರ್ಷದ ಪರೀಕ್ಷೆಗೆ ಹಾಜರಾದ 11 ಪ್ರಶಿಕ್ಷಣಾರ್ಥಿಗಳಲ್ಲಿ ಉನ್ನತ ಶ್ರೇಣಿಯಲ್ಲಿ 10 ಪ್ರಶಿಕ್ಷಣಾರ್ಥಿಗಳು ಮತ್ತು ಪ್ರಥಮ ಶ್ರೇಣಿಯಲ್ಲಿ ಒಬ್ಬರು ಉತ್ತೀರ್ಣರಾಗಿ ಶೇ.100ರಷ್ಟು ಸಾಧನೆ ಮಾಡಿದ್ದಾರೆ. ವಿಜಯಲಕ್ಷ್ಮೀ ಹೆಚ್ ವೀರೇಶ ಅವರು ಶೇ.95 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ್ದಾರೆ. ಅಂಜಲಿ ಗೊರವಲೆಕ್ಕಪ್ಪ ಶೇ.94.37 ಹಾಗೂ ಆಸೀಯಾ ಹುಸೇನಸಾಬ ಶೇ.94.25 ರಷ್ಟು ಅಂಕ ಪಡೆದಿದ್ದಾರೆ. ಡಿ.ಇಎಲ್‌.ಇಡಿ ಪ್ರಥಮ ವರ್ಷದ ಪರೀಕ್ಷೆಯಲ್ಲಿ ಪೂಜಾ ಮಂಜುನಾಥ ಶೇ. 93.25 ಮತ್ತು ಅಜ್ಮೀರ ಹುಸೇನಸಾಬ ನದಾಫ್ ಶೇ. 92ರಷ್ಟು ಅಂಕ ಗಳಿಸಿದ್ದಾರೆ. 

ಪ್ರಶಿಕ್ಷಣಾರ್ಥಿಗಳ ಸಾಧನೆಗೆ ಡಯಟ್ ಸಂಸ್ಥೆಯ ಪ್ರಾಚಾರ್ಯರು, ಹಿರಿಯ ಉಪನ್ಯಾಸಕರು ಮತ್ತು ಪಿ.ಎಸ್.ಟಿ.ಇಯ ಮುಖ್ಯಸ್ಥರು ಮತ್ತು ಎಲ್ಲಾ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ನವ ವಿವಾಹಿತೆ ಆತ್ಮ ಹತ್ಯೆಗೆ ಶರಣು


ಈ ದಿವಸ ವಾರ್ತೆ

ವಿಜಯಪುರ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನಲ್ಲಿ ಇತ್ತೀಚೆಗೆ ನಡೆದಿದೆ. ಚಡಚಣ ತಾಲೂಕಿನ ನಾಕಿಮಂದಿ ಓಣಿಯ ಚೈತ್ರಾ ಮಲ್ಲಿಕಾರ್ಜುನ ನಾವಿ (23) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

 6 ತಿಂಗಳ ಹಿಂದೆ ಚಡಚಣ ತಾಲೂಕಿನ ನಿವಾಸಿ ಮಲ್ಲಿಕಾರ್ಜುನ  ಜೊತೆ ವಿವಾಹವಾಗಿತ್ತು.

ಮೃತ ಚೈತ್ರಾಳ ಪತಿ ಮಲ್ಲಿಕಾರ್ಜುನ ನಾವಿ, ಮಾವ ಶಿವಪ್ಪ ನಾವಿ ಹಾಗೂ ಅತ್ತೆ ಅಂಬವ್ವ ನಾವಿ ಮೂವರು ಸೇರಿ ವರದಕ್ಷಿಣೆ ತರುವಂತೆ ಮಗಳಿಗೆ ಕಿರುಕುಳ ನೀಡುತ್ತಿದ್ದರು.

ಗಂಡನ ಮನೆಯವರ ಮಾನಸಿಕ ಹಾಗೂ ದೈಹಿಕ ಹಿಂಸೆಯಿಂದ ಬೇಸತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಚೈತ್ರಾಳ ತಂದೆ ಅಶೋಕ ಹಡಪದ ನೀಡಿದ ದೂರಿನ ಮೇರೆಗೆ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒತ್ತಡದ ಜೀವನ ನಿವಾರಿಸಲು ಸಂಗೀತ ಮಹತ್ವದ ಪಾತ್ರ ವಹಿಸುತ್ತದೆ :ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ


ಈ ದಿವಸ‌ ವಾರ್ತೆ

ವಿಜಯಪುರ : ಇಂದಿನ ಒತ್ತಡದ ಜೀವನ ನಿವಾರಿಸಲು ಸಂಗೀತ ಮಹತ್ವದ ಪಾತ್ರ ವಹಿಸುತ್ತದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್. ಆಯುರ್ವೇದ ಮಹಾವಿದ್ಯಾಲ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಹೇಳಿದ್ದಾರೆ.

76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇದೇ ಮೊದಲ ಬಾರಿಗೆ ವಿಜಯಪುರ ಅಂತರ್ ಕಾಲೇಜು ದೇಶಭಕ್ತಿ ಗೀತೆ ಸ್ಪರ್ಧೆ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ನಡೆಯಿತು.  ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  



ಸಂಗೀತಕ್ಕೆ ಮಾನಸಿಕ ಮತ್ತು ದೈಹಿಕ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ.  ಹೀಗಾಗಿ ಸಂಗೀತದ ಕಡೆ ಗಮನ ಹರಿಸಬೇಕು ಎಂದು ಅವರು ಹೇಳಿದರು.  

ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಡಾ. ಡಿ. ಎನ್. ಧರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.  

ಈ ಸ್ಪರ್ಧೆಯಲ್ಲಿ ವೇದಾಂತ ಬಿಸಿಎ ಕಾಲೇಜಿನ ಸಾಕ್ಷಿ ಹಿರೇಮಠ ಪ್ರಥಮ, ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಾಳವಿಕ ಜೋಶಿ, ದ್ವಿತೀಯ ಹಾಗೂ ಬಿ.ಎಲ್.ಡಿಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಸುನಯನಾ ದೇಶಪಾಂಡೆ ತೃತೀಯ ಸ್ಥಾನ ಪಡೆದರು.  ವಿಜೇತರಿಗೆ ಪಾರಿತೋಷಕ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. 

ಸಂಗೀತ ವಿದ್ವಾಂಸರಾದ ಮುತ್ತುರಾಜ ಮದನಭಾವಿ ಮತ್ತು ಸುನಂದಾ ಘಾಟಗೆ ನಿರ್ಣಾಯಕರಾಗಿ ಪಾಲ್ಗೋಂಡರು.  ಸಹ ಕಾರ್ಯದರ್ಶಿ ಡಾ. ವಿಜಯಲಕ್ಷಿ, ವಿಧ್ಯಾರ್ಥಿ ಸಂಘದ ಅಧ್ಯಕ್ಷೆ ಡಾ. ಸೀತಾ ಬಿರಾದಾರ, ಸಾಂಸ್ಕೃತಿಕ ವಿಭಾಗದ ಸಂಯೋಜಕಿ ಡಾ. ಸುಮಾ ಮತ್ತು ಡಾ. ದಾಮೋದರ ಉಪಸ್ಥಿತರಿದ್ದರು. ಡಾ. ಸುಮಾ ಕಗ್ಗೋಡ ವಂದಿಸಿದರು. 

ಈ ಸ್ಪರ್ಧೆಯಲ್ಲಿ ನಗರದ 20ಕ್ಕೂ ಹೆಚ್ಚು ಮಹಾವಿದ್ಯಾಲಗಳ ಒಟ್ಟು 40 ಸ್ಪರ್ಧಾಳುಗಳು ಭಾಗವಹಿಸಿದ್ದರು.

Friday, August 11, 2023

ಗ್ರಾಮೀಣ ಕೂಲಿಕಾರ್ಮಿಕರ ಶಿಶು ಪೋಷಣೆ ಸರ್ಕಾರದ ಮಡಿಲಿಗೆ: ರಾಹುಲ್ ಶಿಂಧೆ




ಈ ದಿವಸ ವಾರ್ತೆ

ವಿಜಯಪುರ: ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ  06 ತಿಂಗಳಿಂದ 03 ವರ್ಷದ ಶಿಶುಗಳನ್ನು ವ್ಯವಸ್ಥಿತ  ಪಾಲನೆ ಪೋಷಣೆ ಮಾಡುವ ಜವಾಬ್ದಾರಿಯನ್ನು   ರಾಜ್ಯ ಸರ್ಕಾರವು ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಎಂಬ ಮಹತ್ವದ ಯೋಜನೆ ಜಾರಿಗೆ ತಂದಿದೆ. ಈ ಮೂಲಕ ರಾಜ್ಯ ಸರ್ಕಾರವು ಕೂಲಿ ಕಾರ್ಮಿಕರ ಶಿಶುಗಳ ಪೋಷಣೆ ಮಾಡುವ ಜವಾಬ್ದಾರಿ ತನ್ನ ಮಡಿಲಿಗೆ ಹಾಕಿಕೊಂಡಿದೆ ಎಂದು ಜಿಲ್ಲಾ ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದ್ದಾರೆ. 

ಜಿಲ್ಲೆಯ ಆಯ್ದ 163 ಗ್ರಾಮ ಪಂಚಾಯತಿಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ  ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಕಾರ್ಯಾರಂಭಗೊಳ್ಳಲಿವೆ.

ಕೂಸಿನ ಮನೆ ಸಿಬ್ಬಂದಿಗಳು: 

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಪಡೆದುಕೊಂಡು ಕೆಲಸ ನಿರ್ವಹಿಸುತ್ತಿರುವ 22 ರಿಂದ 45 ವರ್ಷ ವಯಸ್ಸಿನೊಳಗಿನ ಕನಿಷ್ಠ 10ನೇ ತರಗತಿವರೆಗೆ ವ್ಯಾಸಂಗ ಮಾಡಿರುವ 10 ಜನ ಮಹಿಳಾ ಕೂಲಿಕಾರ್ಮಿಕರೇ ಈ ಕೂಸಿನ ಮನೆಗೆ ಕೇರ್ ಟೆಕರ್ಸ್ ಆಗಿ ನೇಮಕ ಮಾಡಿಕೊಳ್ಳುತ್ತಿರುವುದು ಮತ್ತೊಂದು ವಿಶೇಷ. ಇವರಿಗೆ ಸರಕಾರದಿಂದ ಪ್ರತ್ಯೇಕವಾಗಿ ಗೌರವಧನ ನೀಡದೇ ಮನರೇಗಾ ಯೋಜನೆಯಡಿ ಎನ್.ಎಂ.ಆರ್ ಸೃಜನೆ ಮಾಡಿ ದಿನಕ್ಕೆ ರೂ. 316  ರಂತೆ ನೂರು ದಿನಗಳವರೆಗ ಕೆಲಸ  ನೀಡಲಾಗುತ್ತಿದೆ. ಒಂದು ವೇಳೆ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರು 100 ದಿನ ಕೆಲಸ ನಿರ್ವಹಿಸಿದರೆ ನಂತರ ಮತ್ತೊಬ್ಬರಿಗೆ ಅವಕಾಶ ನೀಡಲಾಗುತ್ತದೆ.

ಕೂಸಿನ ಮನೆ ಕುಶಲತೆಯ ನಿರ್ವಹಣೆಗೆ ತರಬೇತಿ: 

 ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಪ್ರಾರಂಭಕ್ಕೆ ರಾಜ್ಯ ಮಟ್ಟದಲ್ಲಿ ಜಿಲ್ಲೆಯ 05 ಜನರಿಗೆ ತರಬೇತಿ ನೀಡಲಾಗಿದೆ.            ರಾಜ್ಯ ಮಟ್ಟದಲ್ಲಿ ತರಬೇತಿ ಪಡೆದುಕೊಂಡ ಮಾಸ್ಟರ್ ಟ್ರೇನರ್ ಗಳು  ವಿಜಯಪುರ ಜಿಲ್ಲೆಯ ಐದು ಸ್ಥಳಗಳಲ್ಲಿ ಈಗಾಗಲೇ ಎಲ್ಲ ಗ್ರಾಮ ಪಂಚಾಯತಿ ಕೇರ್ ಟೇಕರ್ಸ್ ಗಳಿಗೆ ತರಬೇತಿ ನೀಡಿದ್ದಾರೆ.

ಅನುದಾನ: 

ಕೂಸಿನ ಮನೆ (ಶಿಶು ಪಾಲನಾ ಕೇಂದ್ರ)ಗಳನ್ನು ಆರಂಭಿಸಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ಖಾಲಿ ಇರುವ ಸರಕಾರಿ ಶಾಲೆ, ಅಂಗನವಾಡಿ, ಸಮುದಾಯ ಭವನ ಸೇರಿದಂತೆ ಇತರೆ ಸರಕಾರಿ  ಕಟ್ಟಡಗಳ ಆಯ್ಕೆಗೆ ಪರಿಗಣಿಸಿದೆ.ಈ ಕಟ್ಟಡಗಳ  ಅಲ್ಪ-ಸ್ವಲ್ಪ ದುರಸ್ತಿ, ಕುಡಿಯುವ ನೀರಿನ ವ್ಯವಸ್ಥೆಗಾಗಿ ಸರ್ಕಾರ ಆರಂಭದಲ್ಲಿ ಪ್ರತಿ ಘಟಕಕ್ಕೆ 1 ಲಕ್ಷ ರೂ ಅನುದಾನ ಬಿಡುಗಡೆ ಮಾಡುತ್ತದೆ. ಶಿಶುಗಳಿಗೆ ಪೂರಕ ಪೌಷ್ಠಿಕ ಆಹಾರ, ಅಗತ್ಯ ಔಷಧ ಮತ್ತಿತರ ಸೌಲಭ್ಯಗಳು ಈ ಕೇಂದ್ರದಲ್ಲಿ ದಾಸ್ತಾನು ಇರಿಸಲಾಗುವುದು.

 ಮುಖ್ಯ ಉದ್ದೇಶ: 

ಕೂಸಿನ ಮನೆ (ಶಿಶು ಪಾಲನಾ ಕೇಂದ್ರ)ಗಳ ಮುಖ್ಯ ಉದ್ದೇಶ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಜಮೀನುಗಳಲ್ಲಿ ಕೃಷಿ ಕೆಲಸಕ್ಕೆ ತೆರಳುತ್ತಾರೆ. ಕೂಲಿಕಾರ್ಮಿಕರು ಹಾಗೂ ಕೃಷಿ ಕಾರ್ಮಿಕರು ಬಹುತೇಕರು ಬಡ ಕುಟುಂಬದವರಾಗಿದ್ದು, ಪ್ರತಿ-ನಿತ್ಯ ಕೂಲಿ ಕೆಲಸಕ್ಕೆ ತೆರಳುವ ಅನಿವಾರ್ಯತೆ ಇರುತ್ತದೆ.ಇಂತಹ  ಕುಟುಂಬದ ಮಹಿಳೆಯರು ತಮ್ಮ  ಚಿಕ್ಕ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವುದು ಅಸಾಧ್ಯ.ಮಹಿಳೆಯರು ತಮ್ಮ ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಅವರು ಕೆಲಸದಿಂದ ಮನೆಗೆ ಮರಳುವವರೆಗೆ ಮಗುವಿಗೆ ತಾಯಿ ಹಾಲು ದೊರೆಯುವುದಿಲ್ಲ ಜೊತೆಗೆ ಪೌಷ್ಠಿಕ ಆಹಾರ ದೊರೆಯುವುದಿಲ್ಲ ಇದರಿಂದ ಮಕ್ಕಳು ಅಪೌಷ್ಠಿಕತೆಗೆ ಒಳಗಾಗಬಹುದಾಗಿದೆ. ಇದರಿಂದ ಗ್ರಾಮೀಣರ ಮಾನಸಿಕ ಆರೋಗ್ಯವು ಹಾಳಾಗುತ್ತದೆ. ಈ ಸಮಸ್ಯೆಗಳ ನಿವಾರಣೆಗೆ ಸರಕಾರ ಈ ಯೋಜನೆ ಆರಂಭಿಸಿದೆ. ಹಳ್ಳಿಗಳ ಮಹಿಳೆಯರು ತಮ್ಮ ಮಕ್ಕಳ ಕುರಿತು ಚಿಂತಿಸಿ, ಮಾನಸಿಕವಾಗಿ ಕುಗ್ಗದೇ ಈ ಯೋಜನೆಯ ಸದುಪಯೋಗಪಡೆದುಕೊಂಡು ನಿಶ್ಚಿಂತೆಯಿಂದ ಕೂಸಿನ ಮನೆಯಲ್ಲಿ ತಮ್ಮ 06 ತಿಂಗಳಿಂದ 03 ವರ್ಷದೊಳಗಿನ ಮಕ್ಕಳನ್ನು ಬಿಟ್ಟು ಕೆಲಸಕ್ಕೆ ತೆರಳಬಹುದಾಗಿದೆ ಎಂದು  ಅವರು ತಿಳಿಸಿದ್ದಾರೆ.

ಮಾನವ ಕಳ್ಳ ಸಾಗಾಣಿಕೆ ತಡೆ ದಿನ ಆಚರಣೆ

ಈ ದಿವಸ ವಾರ್ತೆ

ವಿಜಯಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಬಿವೃದ್ದಿ ಯೋಜನೆ ನಗರ ಹಾಗೂ ಗ್ರಾಮೀಣ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ರುಡ್‍ಸೆಟ್ ಸಂಸ್ಥೆಯಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನ ಆಚರಿಸಲಾಯಿತು.

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಸ್.ಕುಂದರ ಅವರು ಉದ್ಘಾಟಿಸಿ, ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಕಾನೂನಿನ್ವಯ ಅಪರಾಧವಾಗಿದ್ದು, ಸಂವಿಧಾನ ಮಾನವ ಕಳ್ಳ ಸಾಗಾಣಿಕೆಯಿಂದ ಮುಕ್ತಗೊಳಿಸಲು ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಲವು ಕಾನೂನುಗಳಿದ್ದು, ಸೂಕ್ತ ಪಾಲನೆಯಿಂದ ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಬಹುದಾಗಿದೆ ಎಂದು ಹೇಳಿದ ಅವರು, ಸವಿವರವಾಗಿ ಅಂಕಿ-ಅಂಶದೊಂದಿಗೆ ಮಾನವ ಕಳ್ಳ ಸಾಗಾಣಿಕೆ ಕುರಿತು ಮಾತನಾಡಿದರು.

ಈ ಸಂದರ್ಭ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ.ಕೆ.ಚವ್ಹಾಣ ಅವರು, ಬಂದಂತಹ ಅತಿಥಿ ಹಾಗೂ ಗಣ್ಯ ವ್ಯಕ್ತಿಗಳಿಗೆ ಸ್ವಾಗತವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಡಿವೈಎಸ್‍ಪಿ ಗಿರೀಶ ತಳಕಟ್ಟಿ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಶ್ರೀಧರ ಕುಲಕರ್ಣಿ ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು  ವಕೀಲರಾದ ಬಾಬು ಅವತಾಡೆ ಪೋಕ್ಸೊ ಕಾಯ್ದೆ ಕುರಿತು, ಮೇಲ್ವಿಚಾರಕಿ ಅಶ್ವಿನಿ ಸನದಿ ಮಾನವ ಕಳ್ಳ ಸಾಗಾಣಿಕೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶ್ರೀಮತಿ ಸಾವಿತ್ರಿ ಗುಗ್ಗರಿ, ಶ್ರೀಮತಿ ದೀಪಾ ಕಾಲೆ, ಶ್ರೀಮತಿ ದೀಪಾಕ್ಷಿ ಜಾನಕಿ, ಶ ಎಸ್.ಸಿ.ಮ್ಯಾಗೇರಿ, ಸಾಹೇಬಗೌಡ ಝುಂಜರವಾಡ, ಶ್ರೀಮತಿ ಜಯಶ್ರೀ ಪವಾರ, ರುಡಸೆಟ್ ಸಂಸ್ಥೆಯ ನಿರ್ದೇಶಕ ಮುತ್ತಣ್ಣ ಧನಗರ ಸೇರಿದಂತೆ ಇತರರು ಉಪಸ್ಥಿತರಿದ್ದರು.