Wednesday, July 24, 2024
Tuesday, July 23, 2024
ರಾಜ್ಯಕ್ಕೆ ಚೊಂಬು ನೀಡಿದ ನಿರ್ಮಲಾ ಸೀತಾರಾಮನ್- ಸಿಎಂ
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ. ಪ್ರಧಾನ ಮಂತ್ರಿಗಳು ತನ್ನ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಕಡೆಗಣಿಸಿದ್ದಾರೆ ಎಂದರು.
ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯ ಸರ್ಕಾರ ಹಲವಾರು ಮನವಿಗಳನ್ನು ಮುಂದಿರಿಸಿತ್ತು. ಆದರೆ ಯಾವುದೇ ಬೇಡಿಕೆಗಳಿಗೂ ಕೇಂದ್ರ ಹಣಕಾಸು ಸಚಿವರು ಸ್ಪಂದಿಸಿಲ್ಲ.
ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಒದಗಿಸುವುದಾಗಿ ಹಿಂದಿನ ಬಜೆಟ್ನಲ್ಲಿ ನಿರ್ಮಲಾ ಸೀತಾರಾಮ್ ಅವರು ಘೋಷಿಸಿದ್ದರು. ಆದರೆ ಈ ಯೋಜನೆಗೆ ನಯಾ ಪೈಸೆ ಒದಗಿಸಿಲ್ಲ. ಈ ಆಯವ್ಯಯದಲ್ಲಿ ಒದಗಿಸುವಂತೆ ಕೋರಲಾಗಿತ್ತು. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈ ವರ್ಷ 5ಸಾವಿರ ಕೋಟಿ ರೂ. ಅನುದಾನ ಒದಗಿಸುತ್ತಿದೆ. ಆದರೆ ಇದಕ್ಕೆ ಪೂರಕವಾಗಿ ಹಿಂದುಳಿದ ತಾಲ್ಲೂಕುಗಳಿಗೆ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿತ್ತು. ಇದೇ ರೀತಿ ಮಹಾದಾಯಿ ಯೋಜನೆ, ಮೇಕೆದಾಟು ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಕುರಿತು ಬಜೆಟ್ನಲ್ಲಿ ಯಾವುದೇ ಪ್ರಸ್ತಾಪ ಮಾಡದೆ ರೈತರಿಗೆ ಮೋಸ ಮಾಡಿದ್ದಾರೆ.
15 ನೇ ಹಣಕಾಸು ಆಯೋಗದ ಶಿಫಾರಸಿನಂತೆ ಪೆರಿಫೆರಲ್ ರಸ್ತೆ ನಿರ್ಮಾಣ, ಕೆರೆಗಳ ಅಭಿವೃದ್ಧಿ, ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳಿಗೆ ಒಟ್ಟು 11,485 ಕೋಟಿ ರೂ. ಅನುದಾನವನ್ನು ನೀಡುವಂತೆ ಕೋರಲಾಗಿತ್ತು. ಜೊತೆಗೆ ಹಲವಾರು ವರ್ಷಗಳಿಂದ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಬೇಡಿಕೆಯಿದ್ದು, ಬಜೆಟ್ ಪೂರ್ವಭಾವಿ ಸಭೆಯಲ್ಲಿಯೂ ಈ ಕುರಿತು ಬೇಡಿಕೆ ಸಲ್ಲಿಸಲಾಗಿತ್ತು. ಈ ಯಾವ ಮನವಿಗಳಿಗೂ ಕೇಂದ್ರ ಸರ್ಕಾರ ಮನ್ನಣೆ ನೀಡಿಲ್ಲ.
ಈ ಹಿಂದಿನ ಬಜೆಟ್ನಲ್ಲಿ ರಾಜ್ಯಕ್ಕೆ ಘೋಷಿಸಿದ್ದ ಯೋಜನೆಗಳಿಗೇ ಕೇಂದ್ರ ಸರ್ಕಾರ ಇನ್ನೂ ಯಾವುದೇ ಅನುದಾನ ಒದಗಿಸಿಲ್ಲ. ಹೀಗಾಗಿ ಈ ಬಾರಿ ಕೈಗಾರಿಕಾ ಕಾರಿಡಾರ್ ಬಗ್ಗೆ ಪ್ರಸ್ತಾಪಿಸಿರುವುದು ಕೇವಲ ಘೋಷಣೆಯಾಗಿ ಮಾತ್ರ ಉಳಿಯಲಿದೆ ಎಂದರು.
ಈ ಬಜೆಟ್ ಜನವಿರೋಧಿಯಾಗಿದ್ದು, ವಿಶೇಷವಾಗಿ ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ.
ಈ ಬಜೆಟ್ ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರೈತರು 5 ವರ್ಷಗಳಿಂದ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರಚಿಸಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಬಜೆಟ್ ನಲ್ಲಿ ಚಕಾರವನ್ನೇ ಎತ್ತಿಲ್ಲ. ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳ ಜಾರಿ ಬಗ್ಗೆಯೂ ಯಾವುದೇ ಮಾತು ಆಡದೆ ರೈತರಿಗೆ ಪಂಗನಾಮ ಹಾಕಿದೆ ಎಂದು ಹೇಳಿದರು.
ಕೇಂದ್ರ ಸಂಪುಟದಲ್ಲಿ ರಾಜ್ಯದ ಐದು ಜನ ಸಚಿವರಾಗಿದ್ದರೂ, ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ, ಈ ಐದೂ ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ವಿಫಲರಾಗಿದ್ದಾರೆ.
ಆರೋಗ್ಯ, ರಕ್ಷಣೆ, ಆರೋಗ್ಯ, ಐಟಿ ಮತ್ತು ಸಂವಹನ ಕ್ಷೇತ್ರಗಳಿಗೆ ಕಳೆದ ಫೆಬ್ರವರಿಯಲ್ಲಿ ಮಂಡಿಸಲಾಗಿದ್ದ ಮಧ್ಯಂತರ ಬಜೆಟ್ನಲ್ಲಿ ಘೋಷಿಸಿದ್ದ ಅನುದಾನವನ್ನು ಈಗ ಕಡಿತಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿಗೆ ಅನುದಾನದಲ್ಲೂ ಗಣನೀಯವಾಗಿ ಕಡಿತಗೊಳಿಸಿರುವುದು ಈ ಸಮುದಾಯಗಳಿಗೆ ಎಸಗಿರುವ ದ್ರೋಹವಾಗಿದೆ ಎಂದರು.
*ಆಗಸ್ಟ್ 28 ರಂದು ರಾಜ್ಯಕ್ಕೆ 16ನೇ ಹಣಕಾಸು ಆಯೋಗ ಭೇಟಿ*
ಕೇಂದ್ರದ 16 ನೇ ಹಣಕಾಸು ಆಯೋಗವು ಆಗಸ್ಟ್ 28 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಹಿಂದಿನ ಬಾರಿ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಮನವಿ ಮಾಡಲಾಗುವುದು. ಈ ಕುರಿತು ಸಮರ್ಥವಾಗಿ ವಿಷಯ ಮಂಡಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ರಾಜಕೀಯ ಕಾರ್ಯದರ್ಶಿಗಳಾದ ಗೋವದರಾಜು, ನಸೀರ್ ಅಹಮದ್ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಬೆಂಗಳೂರು ವಿವಿ: ಸಂಶೋಧನಾ ವಿದ್ಯಾರ್ಥಿ ಶ್ರೀನಿವಾಸ ಎನ್ ರವರಿಗೆ : 'ಕನ್ನಡ ಸಾಹಿತ್ಯ ಚಿನ್ನ ಪ್ರಶಸ್ತಿ' ಪ್ರಧಾನ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ.ವೆಂಕಟಗಿರಿಗೌಡ ಸಭಾಂಗಣದಲ್ಲಿ ಆಯೋಜಿಸಿದ ಸಂವಹನ ವಿಭಾಗದ ಸುವರ್ಣ ಮಹೋತ್ಸವದ (1973-2023) ಅಂಗವಾಗಿ 'ಮೀಡಿಯಾ ಸ್ಪಿಯರ್- 2024, "ಭಾರತೀಯ ಮಾಧ್ಯಮ ಉದ್ಯಮದ ರೂಪಾಂತರ" ರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರು ವಿವಿಯ ಸಂವಹನ ವಿಭಾಗ, ಭಾರತೀಯ ಸಂವಹನ ಕಾಂಗ್ರೆಸ್ (ಐಸಿಸಿ) ಹಾಗೂ ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಮತ್ತು ಸಂವಹನ ಶಿಕ್ಷಕರ ಸಂಘ (ಕೆಎಸ್ ಜೆಸಿಟಿಎ) ಸಹಯೋಗದೊಂದಿಗೆ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ನಡೆಸಲಾಯಿತು.
ಇದರ ಪ್ರಯುಕ್ತ ಕನ್ನಡ ಸಾಹಿತ್ಯದಲ್ಲಿ ಸಾಧನೆಗೈದ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದಾರ್ಥಿ ಶ್ರೀನಿವಾಸ ಎನ್ ರವರಿಗೆ: ' 'ಕನ್ನಡ ಸಾಹಿತ್ಯ ಚಿನ್ನ ಪ್ರಶಸ್ತಿ' ಪ್ರಧಾನವನ್ನು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ. ರವಿ , ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಷ ಖಾನಂ, ಬೆಂವಿವಿಯ ಕುಲಸಚಿವ ಶೇಕ್ ಲತೀಫ್, ಮೌಲ್ಯಮಾಪನ ಕುಲಸಚಿವ ಪ್ರೊ. ಶ್ರೀನಿವಾಸ್ ಚೌಡಪ್ಪ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಬಿ. ಶೈಲಶ್ರೀ, ಭೂಪಾಲ್ ನ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಮಖನ್ ಲಾಲ್ ಚತುರ್ವೇದಿ, ರಾಷ್ಟ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.ಜಿ. ಸುರೇಶ್, ಪಶ್ಚಿಮ ಬಂಗಾಳದ ವಿಶ್ವ ಭಾರತಿ ಕೇಂದ್ರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿರುವ ಪ್ರೊ. ಬಿಪ್ಲಾಬ್ ಲೋಹೋ ಚೌದರಿ, (ಒಡಿಶಾ) ಭುವನೇಶ್ವರ್ ನ ಉತ್ಕಲ್ ವಿಶ್ವವಿದ್ಯಾಲಯದ ಮಾಧ್ಯಮ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಉಪೇಂದ್ರ ಪಾಢಿ, ವಿವಿಯ ಬೋಧಕ ಮತ್ತು ಭೋಧಕೇತರ ವರ್ಗದವರು, ಸ್ನಾತಕೋತ್ತರ ಮತ್ತು ಸಂಶೋಧನಾರ್ಥಿಗಳು, ಮತ್ತಿತರರು ಸಮ್ಮುಖದಲ್ಲಿ ಸ್ಮರಿಣಿಕೆ ನೀಡಿ ಗೌರವಿಸಲಾಯಿತು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

